ಕ್ರಿ.ಶ 597 ರಲ್ಲಿ ಚಾಲುಕ್ಯರಾಜ ಕೀರ್ತಿವರ್ಮನು ನಿಧನನಾದಾಗ, ಅವನ ಮಗ ಎರೆಯ ಇನ್ನೂ ಚಿಕ್ಕ ಹುಡುಗ. ಯುವರಾಜ ಹರೆಯಕ್ಕೆ ಬರುವತನಕ ಪಟ್ಟಾಭಿಷೇಕ ಮಾಡುವಂತಿರಲಿಲ್ಲ. ಆದ್ದರಿಂದ ಎರೆಯನ ಚಿಕ್ಕಪ್ಪ (ಕೀರ್ತಿವರ್ಮನ ತಮ್ಮ) ಮಂಗಳೇಶ, ಎರೆಯ ಆಡಳಿತಯೋಗ್ಯ ವಯಸ್ಸಿಗೆ ಬರುವತನಕ ರಾಜಪ್ರತಿನಿಧಿಯಾಗಿ, ಚಾಲುಕ್ಯ ರಾಜ್ಯದ ಆಡಳಿತವನ್ನು ವಹಿಸಿಕೊಂಡ. ಮಂಗಲೇಶ ಒಳ್ಳೆಯ ರಾಜನೇ ಆಗಿದ್ದರೂ, ಅವನಿಗೆ ರಾಜ್ಯಭಾರವನ್ನು ಎರೆಯನಿಗೆ ವಾಪಾಸು ವಹಿಸಿಕೊಡುವ ಮನಸ್ಸಿರಲಿಲ್ಲ. ಕ್ರಿ.ಶ 603ರಲ್ಲಿ ಎರೆಯನ ಬದಲು, ತನ್ನ ಮಗನನ್ನೇ ಯುವರಾಜನೆಂದು ಘೋಷಿಸಿ ತನ್ನ ವಂಶಕ್ಕೇ ರಾಜ್ಯಭಾರ ಸಿಗುವಂತೆ ತಂತ್ರಮಾಡುತ್ತಾನೆ.
ಇದರಿಂದ ಅತೃಪ್ತನಾದ ಎರೆಯ, ಬಾದಾಮಿಯಿಂದ ಹೊರಬಂದು ಇಂದಿನ ಕೋಲಾರದ ಬಳಿಯಿರುವ ಪ್ರದೇಶದಲ್ಲಿ ಬಲಿಷ್ಟರಾಗಿದ್ದ ‘ಬನ’ರೊಂದಿಗೆ ಸ್ನೇಹಬೆಳೆಸಿ, ಸುತ್ತಮುತ್ತಲ ಪಂಗಡಗಳೊಂದಿಗೆ ಮೈತ್ರಿಮಾಡಿಕೊಂಡು, ಸೈನ್ಯವನ್ನು ಸಂಘಟಿಸುತ್ತಾನೆ. ಹೀಗೆ ಕಟ್ಟಿದ ಸೈನ್ಯದೊಂದಿಗೆ ಎರೆಯ, ಮಂಗಳೇಶನ ಮೇಲೆ ಯುದ್ಧ ಘೋಷಿಸುತ್ತಾನೆ. ಮಂಗಳೇಶನ ಸೈನ್ಯಕ್ಕೂ, ಎರೆಯನ ಸೈನ್ಯಕ್ಕೂ ‘ಎಲಪಟ್ಟು ಸಿಂಬಿಗೆ’ (ಇಂದಿನ ಅನಂತಪುರ) ಎಂಬಲ್ಲಿ ಘೋರಯುದ್ಧ ನಡೆಯುತ್ತದೆ. ಹೀಗೆ ನಡೆದು ಮಂಗಳೇಶನ ಸಾವಿನೊಂದಿಗೆ ಅಂತ್ಯವಾದ ಯುದ್ಧದಲ್ಲಿ, ಎರೆಯ ವಿಜಯಿಶಾಲಿಯಾಗುತ್ತಾನೆ ಎಂದು ಪೆದ್ದವಡಗೂರು ಶಾಸನ ಹೇಳುತ್ತದೆ.
ಯುದ್ದದಲ್ಲಿ ಗೆದ್ದ ಎರೆಯ, ತನ್ನ ಸೈನ್ಯದೊಂದಿಗೆ ಪಟ್ಟದಕಲ್ಲು ತಲುಪುತ್ತಾನೆ. ತನ್ನ ಹೆಸರನ್ನು ಎರಡನೇ ಪುಲಿಕೇಶಿ (ಅಥವಾ ಇಮ್ಮಡಿ ಪುಲಕೇಶಿ) ಎಂದು ಬದಲಾಯಿಸಿಕೊಂಡು, ಕ್ರಿಶ 610ರಲ್ಲಿ, ಚಾಲುಕ್ಯ ರಾಜ್ಯದ ಸಿಂಹಾಸನವನ್ನೇರುತ್ತಾನೆ. ಪಟ್ಟಕ್ಕೆ ಬಂದಕೂಡಲೇ ಇಮ್ಮಡಿ ಪುಲಿಕೇಶಿಗೆ ಕಷ್ಟಕೋಟಲೆಗಳ ಸರಮಾಲೆಯೇ ಕಾದಿರುತ್ತದೆ. ಮಂಗಳೇಶನಿಗೆ ನಿಷ್ಠಾವಂತರಾಗಿದ್ದ ಗೋವಿಂದ ಮತ್ತು ಅಪ್ಪಾಯಿಕ ಎಂಬಿಬ್ಬ ರಾಷ್ಟ್ರಕೂಟರ ಸಾಮಂತರಾಜರು, ಮಂಗಳೇಶನ ಸಾವಿನ ಸುದ್ಧಿ ತಿಳಿದಕೂಡಲೇ ಚಾಲುಕ್ಯರಾಜ್ಯದ ಮೇಲೆ ಯುದ್ಧ ಘೋಷಿಸುತ್ತಾರೆ. ಭೀಮಾನದಿಯ ತಟದಲ್ಲಿ ಎದುರಾಳಿಗಳ ಸೈನ್ಯವನ್ನು ತಡೆದ, ಪುಲಿಕೇಶಿಯ ಸೈನ್ಯದ ಆರ್ಭಟಕ್ಕೆ ಎರಡೇ ವಾರದ ನಂತರ ಯುದ್ಧ ಭೂಮಿಯಲ್ಲಿ ನಿಲ್ಲಲಾಗದೆ ಅಪ್ಪಾಯಿಕ ಪಲಾಯನಮಾಡಿದನು. ಗೋವಿಂದನನ್ನು ಸೆರೆಹಿಡಿಯಲಾಯಿತು. ಕ್ರಿ.ಶ. 634ರ ಐಹೊಳೆ ಶಾಸನದ ಹೇಳುವಂತೆ, ಈ ವಿಜಯವನ್ನು ಘೋಷಿಸಿ ಆಚರಿಸಲು ಇಮ್ಮಡಿ ಪುಲಿಕೇಶಿ ಐಹೊಳೆಯಲ್ಲಿ ಒಂದು ವಿಜಯಸ್ಥಂಭವನ್ನು ಕಟ್ಟಿಸಿದನು.
ಇಲ್ಲಿಂದ ಮುಂದಿನ ಒಂಬತ್ತುವರ್ಷ ಚಾಲುಕ್ಯ ಸಾಮ್ರಾಜ್ಯದ ಸುವರ್ಣಯುಗ. ಇಮ್ಮಡಿ ಪುಲಿಕೇಶಿ ದಖನ್ ಪ್ರಸ್ಥಭೂಮಿಯಲ್ಲಿದ್ದ ಎಲ್ಲಾ ರಾಜರನ್ನೂ ಸೋಲಿಸಿದ್ದಲ್ಲದೇ, ದಕ್ಷಿಣದಲ್ಲಿದಲ್ಲೂ ತನ್ನ ರಾಜ್ಯವನ್ನು ವಿಸ್ತರಿಸಿದ. ಪಶ್ಚಿಮ ಕರಾವಳಿಯಲ್ಲಿ ಆಳುಪರು, ಬನವಾಸಿಯ ಕದಂಬರು, ಕೊಂಕಣದಲ್ಲಿ ಮೌರ್ಯರು, ಇನ್ನೂ ಉತ್ತರಕ್ಕೆ ಮಾಳ್ವದಲ್ಲಿ ಗುರ್ಜರರು, ಪೂರ್ವಕ್ಕೆ ವಿಷ್ಣುಕುಂಡಿನಿಯರು, ಲಾಟರನ್ನೂ ಸಾಮಂತರನ್ನಾಗಿಸಿಕೊಂಡ. ಇಮ್ಮಡಿ ಪುಲಿಕೇಶಿಯ ಅತೀಮುಖ್ಯ ವಿಜಯಗಳಲ್ಲಿ ದಕ್ಷಿಣದ ಪಲ್ಲವರ ಮೇಲಿನ ವಿಜಯ ನೆನಪಿಡುವಂತದ್ದು. ಅಂದಿನ ಕಾಲಕ್ಕೆ, ಸೋಲಿಸಲೇ ಅಸಾಧ್ಯವಾದ ಸೈನ್ಯ ಎಂದು ಹೆಸರು ಪಡೆದಿದ್ದ ಪಲ್ಲವರ ಸೈನ್ಯವನ್ನು, ಅವರ ರಾಜ ‘ಒಂದನೆಯ ಮಹೇಂದ್ರವರ್ಮ’ನನ್ನು ಪಲ್ಲವರ ರಾಜಧಾನಿಗೆ 25 ಕಿ.ಮೀ ದೂರದಲ್ಲಿದ್ದ ‘ಪುಲ್ಲಲೂರ್’ನಲ್ಲಿ ನಡೆದ ಯುದ್ಧದಲ್ಲಿ ಸೋಲಿಸಿದನು. ಪುಲಿಕೇಶಿ ಗಂಗ ವಂಶದ’ದುರ್ವಿನಿತ’ ಹಾಗೂ ‘ಪಾಂಡ್ಯನ್ ಜಯಂತವರಾಮನ್ ರಾಜ’ನ ಸಹಾಯದೊಂದಿಗೆ ಪಲ್ಲವರ ರಾಜಧಾನಿ ‘ಕಂಚೀಪುರ’ಕ್ಕೆ ಮುತ್ತಿಗೆ ಹಾಕುತ್ತಾನೆ. ಮಹೇಂದ್ರವರ್ಮ ತನ್ನ ರಾಜಧಾನಿಯನ್ನು ಉಳಿಸಿಕೊಂಡರೂ ಉತ್ತರದ ಪ್ರಾಂತ್ಯವನ್ನು ಪುಲಿಕೇಶಿಗೆ ಸಮರ್ಪಿಸುತ್ತಾನೆ. ಹೀಗೆ ದಕ್ಷಿಣದ ಅತೀದೊಡ್ಡ ಏಕರಾಜ ಸಾಮ್ರಾಜ್ಯ ಸ್ಥಾಪಿಸಿದ ಇಮ್ಮಡಿ ಪುಲಿಕೇಶಿಯ ಕಾಲದಲ್ಲಿ ಚೀನಾದ ಯಾತ್ರಿಕ/ಇತಿಹಾಸಕಾರ ಹ್ಯುಯೆನ್-ತ್ಸಾಂಗ್, ಪರ್ಶಿಯಾದ ಇತಿಹಾಸಕಾರ ತಬರಿ ಮುಂತಾದವರು ಭೇಟಿಕೊಟ್ಟು ರಾಜ್ಯಭಾರದ ಬಗ್ಗೆ ಅಗಾಧ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇವನ ಸಮಕಾಲೀನನಾಗಿ ಇರಾನ್ ದೇಶದ ದೊರೆಯಾಗಿದ್ದ ಎರಡನೆಯ ಖುಸ್ರುವು ತನ್ನ ರಾಯಭಾರಿಯ ಕೈಯಲ್ಲಿ ಅನೇಕ ಬೆಲೆಬಾಳುವ ಬಹುಮಾನಗಳನ್ನು ಪುಲಕೇಶಿಗೆ ಕಳುಹಿಸಿಕೊಟ್ಟನೆಂದೂ, ಇವರಿಬ್ಬರಿಗೂ ಆಗಿಂದಾಗ್ಗೆ ಪತ್ರವ್ಯವಹಾರವು ನಡೆಯುತ್ತಿದ್ದಿತೆಂದೂ ತಿಳಿದುಬಂದಿದೆ.
ಇಮ್ಮಡಿ ಪುಲಿಕೇಶಿಯ ರಾಜ್ಯಭಾರದ ಅತೀಮುಖ್ಯ ಘಟನೆಯೆಂದರೆ ಗುರ್ಜರ, ಮಾಳ್ವರನ್ನು ಸೋಲಿಸಿ ಉತ್ತರಕ್ಕೂ ತನ್ನ ಸಾಮ್ರಾಜ್ಯ ವಿಸ್ತರಣೆಮಾಡುವಾಗ, ಆಗಿನ ಕನ್ನೌಜದ ಮಹಾರಾಜನಾಗಿದ್ದ ಹರ್ಷವರ್ಧನನೊಡನೆ ನಡೆದ ಯುದ್ಧ. ವಿಂಧ್ಯದ ಉತ್ತರದಿಂದ ಹಿಡಿದು ಹಿಮಾಚಲದವರೆಗೂ ರಾಜ್ಯಭಾರ ಮಾಡುತ್ತಿದ್ದ, ಇಡೀ ಜೀವನದಲ್ಲೇ ಒಂದೇ ಒಂದು ಯುದ್ಧ ಸೋಲದ, ‘ಉತ್ತರಪಥೇಶ್ವರ’ ಎಂದೇ ಬಿರುದು ಪಡೆದಿದ್ದ ಹರ್ಷವರ್ಧನ, ಇಮ್ಮಡಿ ಪುಲಿಕೇಶಿಯ ಉತ್ತರದ ಭಾಗದ ಸಾಮ್ರಾಜ್ಯ ವಿಸ್ತರಣೆಗೆ ಕಡಿವಾಣ ಹಾಕಲು ನಿರ್ಧರಿಸುತ್ತಾನೆ. ನರ್ಮದಾ ನದಿಯ ತಟದಲ್ಲಿ ಎರಡೂ ಸೇನೆಗಳು ಮುಖಾಮುಖಿಯಾಗುತ್ತವೆ. ಎಂಟುವಾರಗಳ ಕಾಲ ನಡೆದ ಜಿಗುಟುಯುದ್ಧದ ನಂತರ, ಪುಲಿಕೇಶಿಗಿಂತಾ ಮೂರುಪಟ್ಟು ದೊಡ್ಡ ಸೈನ್ಯವಿದ್ದರೂ, ತನ್ನ ಅತೀಶಕ್ತಿಶಾಲಿ ಗಜಪಡೆಯಲ್ಲೇ ಹೆಚ್ಚು ನಷ್ಟವನ್ನನುಭವಿಸಿದ ಹರ್ಷವರ್ಧನ, ಯುದ್ದದಲ್ಲಿ ಗೆಲ್ಲಲಾಗದೇ ಶಾಂತಿಸಂಧಾನಕ್ಕೆ ಮುಂದಾಗುತ್ತಾನೆ. ಇಮ್ಮಡಿ ಪುಲಿಕೇಶಿಗೆ ‘ಪರಮೇಶ್ವರ’, ‘ಸತ್ಯಾಶ್ರಯ’, ‘ಪೃಥ್ವೀವಲ್ಲಭ’ ಎಂಬ ಬಿರುದುಗಳನ್ನು ಸಮರ್ಪಿಸಿದುದ್ದಲ್ಲದೇ, ಇಮ್ಮಡಿ ಪುಲಿಕೇಶಿಯನ್ನು ತನ್ನ ದಕ್ಷಿಣದ ಸಮಬಲನೆಂದು ಸ್ಚೀಕರಿಸಿ ಆತನಿಗೆ ‘ದಕ್ಷಿಣಪಥೇಶ್ವರ’ ಎಂಬ ಬಿರುದನ್ನು ಕೊಡುತ್ತಾನೆ. ಹಾಗೂ ನರ್ಮದಾ ನದಿಯನ್ನು ಉತ್ತರದ ಹರ್ಷವರ್ಧನನ ಸಾಮ್ರಾಜ್ಯಕ್ಕೂ, ದಕ್ಷಿಣದ ಚಾಲುಕ್ಯ ಸಾಮ್ರಾಜ್ಯಕ್ಕೂ ಗಡಿಯೆಂದು ನಿರ್ಧರಿಸಿ ಹರ್ಷವರ್ಧನ ಕನ್ನೌಜಿಗೆ ಮರಳುತ್ತಾನೆ. ಈ ಯುದ್ಧ, ಇಂಗ್ಳೀಷಿನ “This is what happens when an unstoppable force meets an immovable object” ಎಂಬ ಜಾಣ್ನುಡಿಗೆ ಒಂದೊಳ್ಳೆಯ ಉದಾಹರಣೆ.
ಕಾಂಚೀಪುರವನ್ನು ಗೆಲ್ಲದ, ಚುಕ್ಕಿಯೊಂದು ಇಮ್ಮಡಿ ಪುಲಿಕೇಶಿಯ ಮನಸ್ಸಲ್ಲೇ ಉಳಿದಿತ್ತು. ಹಾಗಾಗಿ ವಯಸ್ಸಾಗಿ ನೇಪಥ್ಯಕ್ಕೆ ಸರಿಯುವ ಮುನ್ನ ಇನ್ನೊಮ್ಮೆ ಪಲ್ಲವರ ಮೇಲೆ ಯುದ್ಧ ಸಾರಲು ನಿರ್ಧರಿಸಿದ ಪುಲಿಕೇಶಿ, ರಥವನ್ನೇರಿಯೇ ಬಿಟ್ಟ. ಆದರೆ ಈ ಬಾರಿ ಪಲ್ಲವರ ರಾಜ ಒಂದನೇ ನರಸಿಂಹವರ್ಮ, ಪುಲಿಕೇಶಿಯ ವಿಜಯಗಳ ಸರಮಾಲೆಗೆ ಕಡಿವಾಣ ಹಾಕುತ್ತಾನೆ. ಇಮ್ಮಡಿ ಪುಲಿಕೇಶಿಯ ಮರಣದೊಂದಿಗೆ ಯುದ್ಧ ಕೊನೆಗೊಳ್ಳುತ್ತದೆ. ಯುದ್ದವನ್ನು ಗೆದ್ದ ಉತ್ಸಾಹದಲ್ಲಿ ನರಸಿಂಹವರ್ಮ ಚಾಲುಕ್ಯ್ರರ ರಾಜಧಾನಿ ಬಾದಾಮಿಯವರೆಗೂ ಸೈನ್ಯವನ್ನು ಕೊಂಡೊಯ್ದು, ಸಂಪತ್ತಲ್ಲವನ್ನೂ ಕಂಚಿಗೆ ಸಾಗಿಸುತ್ತಾನೆ. ಚಾಲುಕ್ಯರ ರಾಜಧಾನಿ “ಬಾದಾಮಿ” ಪಲ್ಲವರ ಮುಂದಿನ 13 ವರ್ಷಗಳ ರಾಜ್ಯಭಾರದಲ್ಲಿ “ವಾತಾಪಿಕೊಂಡ”ವಾಯ್ತು. (ಬಾದಾಮಿಯ ಮೂಲಹೆಸರು ವಾತಾಪಿ). ಹೀಗೆ, ಒಬ್ಬ ಮಹಾರಾಜನನ್ನು ಸೋಲಿಸಲು ಒಂದನೆಯ ನರಸಿಂಹವರ್ಮನಂತಹ ಇನ್ನೊಬ್ಬ ಮಹಾಯೋಧನೇ ಬರಬೇಕಾಯ್ತು. ದಕ್ಷಿಣದ ಮಹಾನ್ ಸಾಮ್ರಾಜ್ಯವೊಂದು ಹೀಗೆ ಕೊನೆಗೊಂಡಿತು.
ಇಮ್ಮಡಿ ಪುಲಿಕೇಶಿಗೆ ಚಂದ್ರಾದಿತ್ಯ, ಆದಿತ್ಯವರ್ಮ, ವಿಕ್ರಮಾದಿತ್ಯ, ಜಯಸಿಂಹ, ಅಂಬರ ಎಂಬ ಐದು ಜನ ಮಕ್ಕಳು. ತಮ್ಮ ತಮ್ಮಲ್ಲೇ ಕಚ್ಚಾಡಿ, ರಾಜ್ಯವನ್ನು ವಿಂಗಡಿಸಿಕೊಂಡು, ಪಲ್ಲವರಿಗೆ ಸಾಮಂತರಾಗಿ, ಸಣ್ಣ ಸಣ್ಣ ಭಾಗಗಳನ್ನು ಆಳುತ್ತಿದ್ದರು. ಇವರಲ್ಲಿ ಮೂರನೆಯವನಾದ ಮೊದಲನೇ ವಿಕ್ರಮಾದಿತ್ಯ, ಇವರ ಜಗಳಗಳಿಂದ ರೋಸಿಹೋಗಿ, ತನ್ನದೇ ಸೋದರರ ಮೇಲೆ ಯುದ್ಧಮಾಡಿ ಸೋಲಿಸಿ ಆಮೇಲೆ ಅವರನ್ನು ಮನ್ನಿಸಿ, ಸೋದರರನ್ನನ್ನೆಲ್ಲಾ ಒಂದುಗೂಡಿಸಿ ಕ್ರಿ.ಶ. 642ರಲ್ಲಿ ತನ್ನನ್ನು ರಾಜನೆಂದು ಘೋಷಿಸಿಕೊಂಡು, ಪಲ್ಲವರನ್ನು ಒದ್ದೋಡಿಸಿ ಚಾಲುಕ್ಯ ಸಾಮ್ರಾಜ್ಯವನ್ನು ಪುನರ್ಸ್ಥಾಪಿಸಿದನು. ಆತನ 13 ವರ್ಷದ ಆಡಳಿತದಲ್ಲಿ ಹಾಗೂ ಇವನ ಮಗನಾದ ಎರಡನೆಯ ವಿಕ್ರಮಾದಿತ್ಯ ಆಳ್ವಿಕೆಯಲ್ಲಿ ಚಾಲುಕ್ಯ ಸಾಮ್ರಾಜ್ಯ ಸಂಪೂರ್ಣವಾಗಿ ಪುನರ್ನಿರ್ಮಾಣವಾಗಿ, ಮತ್ತೆ ಇಮ್ಮಡಿ ಪುಲಿಕೇಶಿಯ ಕಾಲದ ಸಾಮ್ರಾಜ್ಯಕ್ಕೆ ಹೋಲುವ ಮೇರು ಸ್ಥಿತಿಗೆ ತಲುಪಿತು.
ಇಷ್ಟೆಲ್ಲಾ ಕಥೆ ಯಾಕೆ ಹೇಳಿದೆ ಅಂದರೆ, ಒಂದನೆಯ ನರಸಿಂಹವರ್ಮ ವಾತಾಪಿಯಿಂದ ಸಂಪತ್ತನ್ನು ಕಂಚಿಗೆ ಸಾಗಿಸುವಾಗ, ಆ ಯುದ್ದದ ಗೆಲುವಿನಲ್ಲಿ ಮುಖ್ಯಪಾತ್ರವಹಿಸಿದ್ದ ತನ್ನ ಸೈನ್ಯಾಧಿಕಾರಿ ಪರಂಜ್ಯೋತಿಗೆ, ಖಜಾನೆಯ ಕಾಲುಭಾಗದಷ್ಟು ದೊಡ್ಡ ಉಡುಗೊರೆಯನ್ನೇ ಕೊಡುತ್ತಾನೆ. ಇದರಲ್ಲಿ ಚಾಲುಕ್ಯರ ಅರಮನೆಯಲ್ಲಿದ್ದ, ಚಾಲುಕ್ಯರಾಜರ ಅತ್ಯಂತ ಪ್ರೀತಿಯ ದೊಡ್ಡದೊಂದು ಗಣಪತಿಯ ಮೂರ್ತಿಯೂ ಇರುತ್ತದೆ. ತನ್ನ ರಾಜ್ಯಕ್ಕೆ ಮರಳಿದ ಪರಂಜ್ಯೋತಿ, ತನ್ನೂರಾದ, ತಿರುಚೆಂಕಾಟಂಕುಡಿಯಲ್ಲಿ ಈ ಗಣಪತಿಗೊಂದು ದೇವಸ್ಥಾನಕಟ್ಟಿ, ಅದನ್ನು ಆದರದಿಂದ ನೋಡಿಕೊಳ್ಳುತ್ತಾನೆ. ಹೀಗೆ ಬಾದಾಮಿಯಿಂದ ಅಂದರೆ ಅಂದಿನ ವಾತಾಪಿಯಿಂದ, ಕಂಚಿಗೆ ತಲುಪಿದ ಈ ಗಣಪತಿಯೇ, ಮುತ್ತುಸ್ವಾಮಿ ದೀಕ್ಷಿತರ ಕೃತಿ “ವಾತಾಪಿ ಗಣಪತಿಂ ಭಜೇ…”ಯಲ್ಲಿ ಮೂಡಿಬಂದಿರುವುದು! 🙂
ಇದನ್ನೇ ಹೇಳಬೇಕು ಅಂತಾ ಈ ಹರಿಕಥೆ. ಈಗ ಎಲ್ಲರೂ “ವಾತಾಪಿ ಗಣಪತಿಂ ಭಜೇ….” ಎಂದು ಹಾಡುತ್ತಾ ಮುಂದಿನ ಕೆಲಸ ನೋಡಿಕೊಳ್ಳಿ 🙂
ಕೆಲ ವಿಶೇಷ ಮಾಹಿತಿಗಳು:
(1) ಈ ವಾತಾಪಿ ಗಣಪತಿ ದೇವಸ್ಥಾನ ಇವತ್ತು ತಮಿಳ್ನಾಡಿನ ನಾಗಪಟ್ಟಿನಂ ಜಿಲ್ಲೆಯ ಉತ್ರಪತೀಸ್ವರಸ್ವಾಮಿ ದೇವಸ್ಥಾನದ ಆವರಣದಲ್ಲೇ ಇದೆ. ಆ ಉತ್ರಪತೀಸ್ವರಸ್ವಾಮಿ ದೇವಸ್ಥನವನ್ನೂ ಪರಂಜ್ಯೋತಿಯೇ ಕಟ್ಟಿಸಿದ್ದು. ಇದು ಈಶ್ವರನ ದೇವಸ್ಥಾನವೇ ಆದರೂ, ಪರಂಜ್ಯೋತಿಯ ಪ್ರೀತಿಯ ದೇವ, ಗಣೇಶನ ಬಿಂಬಗಳಿಗೆ ಪ್ರಸಿದ್ಧ.
ದೇವಸ್ಥಾನದ ಮುಖ್ಯ ಗರ್ಭಗುಡಿಯಲ್ಲಿರುವ ಗಣೇಶ, ತನ್ನ ಯಥಾಪ್ರಸಿದ್ಧ ಆನೆಯ ಮುಖದಲ್ಲಿರದೆ, ಮಾನವ ಮುಖದಲ್ಲೇ ಇರೋದು ಒಂದು ವಿಶೇಷ.
(2) ಈ ಮಹಾಸೈನ್ಯಾಧಿಪತಿ ಪರಂಜ್ಯೋತಿ, ಮುಂದೆ ತನ್ನ ಕ್ಷತ್ರಿಯಾಭ್ಯಾಸಗಳನ್ನೆಲ್ಲಾ ತ್ಯಜಿಸಿ, ಜೀವನವನ್ನೇ ಬದಲಾಯಿಸಿಕೊಂಡು ‘ಸಿರುತೊಂದಾರ್’ ಎಂಬ ಹೆಸರಿನ ನಾಯನಾರ್ ಸಂತನಾಗಿ, ತನ್ನ ಜೀವನವನ್ನು ಅಲ್ಲೇ ಕಳೆಯುತ್ತಾನೆ. ನಾಯನಾರ್’ಗಳು ಹಾಗೂ ಆಳ್ವಾರ್’ಗಳು, ಎಂಟನೇ ಶತಮಾನದಲ್ಲಿ ದಕ್ಷಿಣಭಾರತದಲ್ಲಿ ‘ಭಕ್ತಿ ಚಳುವಳಿಗೆ’ ನಾಂದಿ ಹಾಡಿದ ಮಹಾಪುರುಷರು. ಆ 63 ನಾಯನಾರ್’ಗಳಲ್ಲಿ ಈ ಪರಂಜ್ಯೋತಿಯೂ ಒಬ್ಬ! ಜೀವನ ಎಷ್ಟು ವಿಚಿತ್ರ ನೋಡಿ!! ಪರಂಜ್ಯೋತಿಯಿಂದ….ಸಿರುತೊಂದಾರ್!!!
(3) ಎರೆಯ ಎಂಬುವವ ಇಮ್ಮಡಿ ಪುಲಿಕೇಶಿಯಾದರೆ, ಮೊದಲನೆಯ ಪುಲಿಕೇಶಿ ಯಾರು ಎಂಬ ಅನುಮಾನ ನಿಮಗಿದ್ದರೆ:
ಮೊದಲನೇ ಪುಲಿಕೇಶಿ ಎರೆಯನ ಅಜ್ಜ. ಅಂದರೆ ಕೀರ್ತಿವರ್ಮನ ಅಪ್ಪ. ಮಂಗಳೇಶನ ಮಹಾಕೂಟ ಶಾಸನ ಹಾಗೂ ರವಿಕೀರ್ತಿಯ ಐಹೊಳೆ ಶಾಸನದ ಪ್ರಕಾರ ಚಾಲುಕ್ಯರ ಮೂಲ ಪುರುಷ ಕ್ರಿ.ಶ 500ರಲ್ಲಿ ರಾಜ್ಯಭಾರ ಆರಂಭಿಸಿದ ಜಯಸಿಂಹನೇ ಆದರೂ, ಕ್ರಿ.ಶ 540ರಲ್ಲಿ ರಾಜನಾದ ಜಯಸಿಂಹನ ಮೊಮ್ಮಗ ಪುಲಿಕೇಶಿಯೇ ಚಾಲುಕ್ಯ ಸಂತತಿಯ ಮೊದಲ ಸ್ವತಂತ್ರ ರಾಜ. ಬಾದಾಮಿಯಿಂದ ರಾಜ್ಯಭಾರ ಮಾಡಿದ ಈತನ ಕೂದಲು ಬಹುಷಃ ಕೆಂಚು ಬಣ್ಣಕ್ಕಿದ್ದಿರಿಂದ (blonde) ಪುಲಿಕೇಶಿ (ಅಂದರೆ ಹುಲಿಯಂತಾ ಕೂದಲಿರುವವನು) ಎಂಬ ಹೆಸರು ಬಂದಿರಬಹುದೇ ಎಂಬುದು ನನ್ನ ಅನುಮಾನ.
ಈ ಲೇಖನದಲ್ಲಿರುವ ಹೆಚ್ಚಿನ ಐತಿಹಾಸಿಕ ಸತ್ಯಗಳ ಬಗ್ಗೆ ನನ್ನ ಗಮನ ಸೆಳೆದದ್ದು, ಪಕ್ಕಾ ಬೆಂಗಳೂರು ಹುಡುಗ, ಟ್ವಿಟರ್ ಗೆಳೆಯ ಆದಿತ್ಯ ಕುಲಕರ್ಣಿ. ಅವರ ಟ್ವೀಟುಗಳ ಸರಮಾಲೆಯನ್ನೇ, ಅಲ್ಪಸ್ವಲ್ಪ ಸೇರ್ಪಡೆಗಳೊಂದಿಗೆ ಲೇಖನಸ್ವರೂಪದಲ್ಲಿ ಬರೆದಿದ್ದೇನೆ. ಈ ಇಡೀ ಲೇಖನ Aditya Kulkarni ಅವರಿಗೆ ಸೇರಬೇಕಾದದ್ದು.
#ರಾಘವಾಂಕಣ